ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟ : ಆರೆಂಜ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಣೆ



ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮೂರು ತಾಲೂಕಿನ ಅಂಗನವಾಡಿ , ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಕೊಪ್ಪ, ಶೃಂಗೇರಿ ಕಳಸ ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಜಾಗರ , ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿಗಳಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಮಳೆಯಲ್ಲಿ ಮಕ್ಕಳು ಶಾಲೆಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಕೊಪ್ಪ, ಶೃಂಗೇರಿ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ನದಿ ಹಳ್ಳಗಳು ತುಂಬಿ ತುಳುಕುತ್ತಿದೆ.

ಇನ್ನೂ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 8 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC) ತಿಳಿಸಿದೆ. ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

إرسال تعليق

0 تعليقات
* Please Don't Spam Here. All the Comments are Reviewed by Admin.